ಕಲಬುರಗಿ: ರಾಜ್ಯದ ಗೃಹ ಸಚಿವರು ಕೇವಲ ರಾಜಕೀಯ ಹೇಳಿಕೆಗಳಲ್ಲಿ ಕಾಲಹರಣ ಮಾಡದೆ, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳನ್ನು ಒಳಗೊಂಡಂತೆ ಪ್ರತ್ಯೇಕ ಕಲಬುರಗಿ ರೈಲ್ವೆ ಡಿವಿಜನ್ ಸ್ಥಾಪನೆಗೆ ರಾಜ್ಯ ಸರ್ಕಾರ ಕೂಡಲೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ ಒತ್ತಡ ತರಬೇಕು ಎಂದು ಬಿಜೆಪಿ ರಾಜ್ಯ ವಕ್ತಾರೆ ಡಾ. ಸುಧಾ ಹಾಲ್ಕಾಯಿ ಆಗ್ರಹಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಭಾಗವನ್ನು ಮೈಸೂರು ರೈಲ್ವೆ ವಿಭಾಗಕ್ಕೆ ಸೇರಿಸಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ. ಅದೇ ಮಾದರಿಯಲ್ಲಿ ಕಲ್ಯಾಣ ಕರ್ನಾಟಕಕ್ಕೂ ಪ್ರತ್ಯೇಕ ರೈಲ್ವೆ ಡಿವಿಜನ್ ನೀಡುವ ಮೂಲಕ ಈ ಭಾಗದ ರೈಲ್ವೆ ಮೂಲಸೌಕರ್ಯ ಹಾಗೂ ಸೇವೆಗಳನ್ನು ಬಲಪಡಿಸಬೇಕಿದೆ ಎಂದರು.
ಕಲ್ಯಾಣ ಕರ್ನಾಟಕದ ರೈಲ್ವೆ ಅಭಿವೃದ್ಧಿಗಾಗಿ ಪಕ್ಷಭೇದ ಮರೆತು ಎಲ್ಲ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಸಾರ್ವಜನಿಕರು ಒಂದಾಗಿ ಹೋರಾಡಬೇಕು ಎಂದು ಅವರು ಕರೆ ನೀಡಿದರು.
ಇದೇ ವೇಳೆ ನಗರದ ಮೂಲಸೌಕರ್ಯಗಳ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ಕಲಬುರಗಿ ನಗರದ ರಸ್ತೆಗಳು ತೀರಾ ಹದಗೆಟ್ಟಿದ್ದು, ದೊಡ್ಡ ದೊಡ್ಡ ಗುಂಡಿ ಬಿದ್ದು ಸಾರ್ವಜನಿಕರ ಸಂಚಾರಕ್ಕೆ ಕಷ್ಟವಾಗಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ರಸ್ತೆ ದುರಸ್ತಿ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಸಾರ್ವಜನಿಕ ಉದ್ಯಾನವನಗಳ ಶೇ. 25ರಷ್ಟು ಜಾಗವನ್ನು ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳಲು ಅವಕಾಶ ನೀಡುವ ಮಸೂದೆಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ನಗರದಲ್ಲಿ ಈಗಾಗಲೇ ಹಸಿರು ಪ್ರದೇಶ ಕಡಿಮೆಯಾಗುತ್ತಿದ್ದು, ಪಾರ್ಕ್ಗಳ ಜಾಗವನ್ನು ಬೇರೆ ಉದ್ದೇಶಕ್ಕೆ ಬಳಸುವುದು ಸಾರ್ವಜನಿಕ ಹಿತಕ್ಕೆ ವಿರುದ್ಧವಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ಗಿರಿರಾಜ್ ಯಳಮೇಲಿ, “ಪ್ರತ್ಯೇಕ ಕಲಬುರಗಿ ರೈಲ್ವೆ ಡಿವಿಜನ್ ಸ್ಥಾಪನೆಯಾದರೆ ಈ ಭಾಗದ ಕೈಗಾರಿಕೆ, ವ್ಯಾಪಾರ ಹಾಗೂ ಉದ್ಯೋಗಾವಕಾಶಗಳಿಗೆ ಹೊಸ ಚೈತನ್ಯ ಸಿಗಲಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಭೇದಾಭಿಪ್ರಾಯಗಳನ್ನು ಬದಿಗೊತ್ತಿ ಎಲ್ಲರೂ ಒಂದಾಗಿ ಧ್ವನಿ ಎತ್ತಬೇಕಿದೆ” ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ದೇವೀಂದ್ರ ದೇಸಾಯಿ ಕಲ್ಲೂರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
